ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.
1,205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎಎನ್ಎಂ) ಮತ್ತು 300 ಆರೋಗ್ಯ ನಿರೀಕ್ಷಣಾಧಿಕಾರಿ (ಎಚ್ಐಒ) ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯ ಸಹಮತಿ ಯನ್ನು ಪಡೆಯಲಾಗಿದ್ದು, ಕೆಪಿಎಸ್ಸಿ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕಾತಿ ನಡೆಯಲಿದೆ.
ಆರಂಭದಲ್ಲಿ ಈ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಬಹುದು. ಈ ಮೂಲಕ ಕಾಯಂ ನೇಮಕಾತಿ ಸಂದರ್ಭದಲ್ಲಿ ಕಾನೂನು ತೊಡಕುಗಳು ಎದುರಾಗದಂತೆ ಎಚ್ಚರ ವಹಿಸಬೇಕು. ಕಾಯಂ ನೇಮಕಾತಿ ಸಂದರ್ಭದಲ್ಲಿ ಗುತ್ತಿಗೆ ನೌಕರಿ ಸೇವೆಯನ್ನು ಪರಿಗಣಿಸದೆ, ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಬೇಕು ಎಂದು ಸೂಚಿಸಲಾಗಿದೆ.
ಅರ್ಜಿ ಆಹ್ವಾನಿಸಿದಾಗ ಸಂಭವನೀಯ ಅಭ್ಯರ್ಥಿಗಳಿಂದ ಉತ್ತಮ ಸ್ಪಂದನೆ ಪಡೆಯಲು ಹಾಲಿ ಅರ್ಹತೆಗಳನ್ನು ಪರಿಷ್ಕರಿಸಬೇಕು. ಇದು ತ್ವರಿತವಾಗಿ ನಡೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಯುಕ್ತರು ಸೇರಿದಂತೆ ಉನ್ನತ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಆದೇಶದಲ್ಲಿ ಸೂಚಿಸಿದೆ.