ಬೆಂಗಳೂರು: ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸ್ಫೋಟಕ ವಸ್ತು ಪೂರೈಸಿದ ಪ್ರಕರಣ ಸಂಬಂಧ ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಶಂಕಿತ ಉಗ್ರನಿಗೆ ಜೀವಾವಧಿ ಹಾಗೂ ಆತನ ಇಬ್ಬರು ಸಹಚರರಿಗೆ 10 ವರ್ಷಗಳ ಶಿಕ್ಷೆ ವಿಧಿಸಿ ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಹೋಮಿಯೋಪತಿ ವೈದ್ಯ ಡಾ.ಸೈಯದ್ ಇಸ್ಮಾಯಿಲ್ ಅಥಾಕ್ಗೆ ಜೀವಾವಧಿ ಹಾಗೂ ಆತನ ಸಹಚರರಾದ ಅಬ್ದುಲ್ ಸುಬೂರ್ ಮತ್ತು ಸದ್ಧಾಂ ಹುಸೇನ್ಗೆ 10 ವರ್ಷಗಳ ಶಿಕ್ಷೆಯಾಗಿದೆ. ಈ ಪ್ರಕರಣದಲ್ಲಿ ಮೂವರು ಶಂಕಿತ ಉಗ್ರರನ್ನು ದೋಷಿಗಳೆಂದು ತೀರ್ಪು ಪ್ರಕಟಿಸಿದ್ದ ನ್ಯಾಯಾಲಯ ಶಿಕ್ಷೆ ಪ್ರಮಾಣ ಆದೇಶವನ್ನು ಕಾಯ್ದರಿಸಿತ್ತು.
ಈ ವಿಧ್ವಂಸಕ ಕೃತ್ಯದ ಹಿಂದೆ ಭಟ್ಕಳದ ನಂಟಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಈ ಸುಳಿವು ಆಧರಿಸಿ ಕಾರ್ಯಾಚರಣೆಗಿಳಿದ ಬೆಂಗಳೂರು ಸಿಸಿಬಿ ಪೊಲೀಸರು ಪುಲಿಕೇಶಿ ನಗರದಲ್ಲಿ ವೈದ್ಯ ಆಫಾಕ್, ಅಬ್ದುಲ್ ಸುಬೂರ್ ಹಾಗೂ ಭಟ್ಕಳದಲ್ಲಿ ಸದ್ದಾಂ ಹುಸೇನ್ ನನ್ನು ಬಂಧಿಸಿದ್ದರು.
ಬಳಿಕ ಸಿಸಿಬಿ ತನಿಖೆಯಲ್ಲಿ ದೇಶದ ವಿವಿಧೆಡೆ ಎಂಐ ಸಂಘಟನೆ ನಡೆಸಿದ್ದ ವಿಧ್ವಂಸಕ ಕೃತ್ಯಗಳಿಗೆ ಸ್ಪೋಟಕ ವಸ್ತುಗಳನ್ನು ಶಂಕಿತ ಉಗ್ರ ವೈದ್ಯ ಆಫಾಕ್ ತಂಡ ಪೂರೈಸಿದ್ದ ಮಹತ್ವದ ಸಂಗತಿ ಬಯಲಾಗಿತ್ತು.
ಈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಅಂದಿನ ಸಿಸಿಬಿ ಇನ್ಸ್ಪೆಕ್ಟರ್ ಎಂ.ಕೆ.ತಮ್ಮಯ್ಯ ಸಲ್ಲಿಸಿದ್ದರು. 9 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಶಿಕ್ಷೆ ವಿಧಿಸಿ ಆದೇಶಿಸಿದೆ.