ಸುದ್ದಿ

ಮೈಕ್ರೋ ಫೈನಾನ್ಸ್‌ಗಳಿಗೆ ಸರ್ಕಾರ ಅಂಕುಶ: ಆರ್‌ಬಿಐ ನಿಯಮಗಳನ್ನು ಮೀರಿ ಕಿರುಕುಳ ನೀಡಿದರೆ ಕಠಿಣ ಕ್ರಮ; ಸಿಎಂ

Share It

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ನವರು ಸಾಲ ವಸೂಲಿ ವೇಳೆ ಆರ್‌ಬಿಐ ನ ನಿಯಮಗಳನ್ನು ಮೀರಿ ಕಿರುಕುಳ ನೀಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ವರದಿಯಾಗುತ್ತಿದ್ದು, ಈ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಈ ವೇಳೆ ಬ್ಯಾಂಕ್, ಫೈನಾನ್ಸ್ ಹಾಗೂ ಮೈಕ್ರೋ ಫೈನಾನ್ಸ್‌ಗಳ ಪ್ರತಿನಿಧಿಗಳ ಮೇಲೆ ಪ್ರಶ್ನೆಗಳ ಸುರಿಮಳೆಗೈದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಬಾಹಿರವಾಗಿ ಸಾಲ ವಸೂಲಿ ಮಾಡಿದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.

‘ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ’ ಎಂದು ತಾಕೀತು ಮಾಡಿದರು.

ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ’ ಎಂದು ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಮುಖ್ಯಮಂತ್ರಿ ಖಾರವಾಗಿ ಪ್ರಶ್ನಿಸಿದರು.

‘ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ? ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ? ಆರ್ ಬಿಐ ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಸಾಮರ್ಥ್ಯ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?’ ಎಂದೂ ಕೇಳಿದರು.

‘ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾ‌ರ್ ಕೆವೈಸಿ ಮಾಡಿಸುತ್ತಿಲ್ಲ ಏಕೆ ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು. ಆರ್ ಬಿ ಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ? ಎಂದು ಆರ್ ಬಿ ಐ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪ್ರಶ್ನಿಸಿದರು.


Share It

You cannot copy content of this page