ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನಡೆಸಿರುವ ತನಿಖೆಯ ಅಂತಿಮ ವರದಿ ಸಲ್ಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ಕೆಲದಿನಗಳ ಸಮಯಾವಕಾಶ ನೀಡಿದೆ.
ತಾಂತ್ರಿಕ ಕಾರಣಗಳಿಂದಾಗಿ ಅಂತಿಮ ವರದಿ ಸಲ್ಲಿಕೆಗೆ ಕಾಲಾವಕಾಶ ನೀಡಬೇಕೆಂದು ಸೋಮವಾರ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ ನ್ಯಾಯಾಲಯ ಕಾಲಾವಕಾಶ ನೀಡಿ ಫೆ.24ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ ನೇತೃತ್ವದ ತಂಡವು,ಇತ್ತೀಚಿಗೆ ತನ್ನ ವರದಿಯನ್ನು ಲೋಕಾಯುಕ್ತ ಐಜಿಪಿ ಅವರಿಗೆ ಸಲ್ಲಿಕೆ ಮಾಡಿತ್ತು. ವರದಿ ಅಧ್ಯಯನ ನಡೆಸಿದ ಐಜಿಪಿ ಸುಬ್ರಹ್ಮಣ್ಯೇಶ್ವರ ಅವರು ವರದಿಯಲ್ಲಿ ಕೆಲವೊಂದು ತಾಂತ್ರಿಕ ಕಾರಣಗಳಿದ್ದು, ಹೀಗಾಗಿ ವರದಿಗೆ ಕೆಲ ಅಂಶಗಳು ಸೇರಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕೋಟ್೯ ಕಾಲಾವಕಾಶ ಕೋರುವಂತೆ ಸೂಚನೆ ನೀಡಿದ್ದರು.