ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ಸುಳ್ಳು ದೂರುಗಳು ದಾಖಲಾಗುತ್ತಿರುವುದು ತನಿಖೆಯಿಂದ ತಿಳಿದು ಬಂದಿದ್ದು, ಸುಳ್ಳು ದೂರು ನೀಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಎಚ್ಚರಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಕಳೆದ ಐದು ವರ್ಷಗಳಲ್ಲಿ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ದೂರುಗಳ ಪೈಕಿ, ಆರು ಪ್ರಕರಣಗಳು ಸುಳ್ಳು ದೂರುಗಳು ಎಂಬುದು ತನಿಖೆ ಮಾಡಿದಾಗ ತುಳಿದು ಬಂದಿದೆ. ಆ ರೀತಿಯ ಸುಳ್ಳು ನೀಡಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಈ ಆರು ಪ್ರಕರಣಗಳ ಪೈಕಿ ನಾಲ್ಕು ಪ್ರಕರಣಗಳಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ. ಎರಡು ಪ್ರಕರಣಗಳಲ್ಲಿ ವಿಚಾರಣೆ ಪೂರ್ಣಗೊಳಿಸಿ ಶಿಕ್ಷೆ ಘೋಷಿಸಲಾಗಿದೆ. ಉಳಿದ ಎರಡು ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.
2022ರಲ್ಲಿ ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣವೊಂದು ದಾಖಲಾಗಿತ್ತು. ದೂರುದಾರರು ಸುಳ್ಳು ದೂರು ನೀಡಿದ್ದರು ಎಂಬುದು ತನಿಖೆಯಿಂದ ಸಾಬೀತಾಗಿತ್ತು. ಅದೇ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ 2024ರಲ್ಲಿ ದಾಖಲಾಗಿದ್ದ ವಾಹನ ಕಳವು ಪ್ರಕರಣದ ತನಿಖೆ ವೇಳೆ ದೂರುದಾರರು ಸುಳ್ಳು ದೂರು ನೀಡಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ ಎಂದು ಹೇಳಿದರು.