ಆತ್ಮಹತ್ಯೆ ಪ್ರಕರಣದಲ್ಲಿ ತನಿಖಾ ಸಂಸ್ಥೆಗಳು ಸಂವೇದನಾಶೀಲತೆಯಿಂದ ನಡೆದುಕೊಳ್ಳಬೇಕು
ನವದೆಹಲಿ: ಆತ್ಮಹತ್ಯೆ ಪ್ರಕರಣಗಳಲ್ಲಿ ಐಪಿಸಿ ಸೆಕ್ಷನ್ 306 ಅನ್ನು ಯಾಂತ್ರಿಕವಾಗಿ ಬಳಸುವುದನ್ನು ನಿಲ್ಲಿಸಬೇಕು. ಅಲ್ಲದೇ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಕ್ಕೆ ಸಮಾಧಾನ ತರುವ ಏಕೈಕ ಉದ್ದೇಶದಿಂದಲೂ ಈ ಸೆಕ್ಷನ್ ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಆತ್ಮಹತ್ಯೆ ಪ್ರಕರಣದಲ್ಲಿ ತನಿಖಾ ಸಂಸ್ಥೆಗಳು ಸಂವೇದನಾಶೀಲತೆಯಿಂದ ನಡೆದುಕೊಳ್ಳಬೇಕು ಎಂದು ಹೇಳಿರುವ ನ್ಯಾ.ಅಭಯ್ ಎಸ್.ಓಕಾ ಹಾಗೂ ನ್ಯಾ. ಕೆ.ವಿ.ವಿಶ್ವನಾಥ್ ಅವರಿದ್ದ ಪೀಠ, ಯಾಂತ್ರಿಕವಾಗಿ ಸೆಕ್ಷನ್ 306ರ ಬಳಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದೆ.
ಸಂತ್ರಸ್ತರ ಸಮಾಧಾನಕ್ಕೆ ಏಕಾಏಕಿ ಸೆಕ್ಷೆನ್ 306ರ ಅಡಿ ಪ್ರಕರಣ ದಾಖಲಿಸುವ ಮೊದಲು ಪೊಲೀಸರು ವಿವೇಚನೆಯಿಂದ ನಡೆದುಕೊಳ್ಳಬೇಕು. ವಿಚಾರಣಾಧೀನ ನ್ಯಾಯಾಲಯಗಳು ಸಹ ಇಂಥ ಸೆಕ್ಷನ್ ಗಳಡಿ ದಾಖಲಾದ ಪ್ರಕರಣಗಳ ಬಗ್ಗೆ ವಿಚಾರಣೆ ವೇಳೆ ಎಚ್ಚರಿಕೆ ವಹಿಸಬೇಕು,” ಎಂದು ನ್ಯಾಯಪೀಠ ಹೇಳಿದೆ.
ಐಪಿಸಿ ಸೆಕ್ಷನ್ 306ರಡಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಖುಲಾಸೆಗೊಳಿಸಬೇಕು ಎಂದು ಕೋರಿ ಮಹೇಂದ್ರ ಅವಸೆ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್ ತಿರಸ್ಕರಿಸಿತ್ತು. ಹೈಕೋರ್ಟ್ನ ಈ ಆದೇಶ ಪ್ರಶ್ನಿಸಿ, ಮಹೇಂದ್ರ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಮಹೇಂದ್ರ ಅವರ ವಿರುದ್ಧ ಆರೋಪ ನಿಗದಿ ಮಾಡಲು ಯಾವುದೇ ಆಧಾರಗಳಿಲ್ಲ ಎಂದು ಅಭಿಪ್ರಾಯಪಟ್ಟಿದೆ.