ಬೆಂಗಳೂರು: ಮಂಗಳೂರಿನ ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ನಮ್ಮ ಪೋಲೀಸರು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಈ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಮಂಗಳೂರು ನಗರದ ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಗುರುವಾರ ತಡರಾತ್ರಿ ಅಪರಿಚಿತ ತಂಡವೊಂದು ಹತ್ಯೆ ಮಾಡಿತ್ತು.
ಈ ಕುರಿತು ಮಾತನಾಡಿದ ಗೃಹ ಸಚಿವ ಡಾ. ಪರಮೇಶ್ವರ್, NIA ತನಿಖೆ ನಡೆಯಬೇಕು ಎಂಬುದು ಬಿಜೆಪಿ ಅಭಿಪ್ರಾಯ.ನಮ್ಮ ಪೋಲೀಸರು ತಮ್ಮ ಕೆಲಸವನ್ನು ಚೆನ್ನಾಗಿ ಮಾಡುತ್ತಿದ್ದಾರೆ ಎಂಬುದು ನನ್ನ ಅಭಿಪ್ರಾಯ. ಈ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸುವ ಅಗತ್ಯವಿಲ್ಲ ಎಂದರು.
ಹತ್ಯೆಯಾದ ಸುಹಾಸ್ ಶೆಟ್ಟಿ ಅವರ ವಿರುದ್ಧ ಈಗಾಗಲೇ ಐದು ಕ್ರಿಮಿನಲ್ ಪ್ರಕರಣಗಳಿವೆ. ದಯವಿಟ್ಟು ಇದೊಂದು ಕೊಲೆ ಪ್ರಕರಣ ಎಂದು ತಿಳಿಯಿರಿ. ಆತನ ವಿರುದ್ಧ ಐದು ಕ್ರಿಮಿನಲ್ ಮೊಕದ್ದಮೆಗಳಿದ್ದವು. ಆ ಕಾರಣಕ್ಕೆ ಸರ್ಕಾರದಿಂದ ಯಾರೊಬ್ಬರೂ, ನಾನಾಗಲಿ, ಬೇರೆ ಯಾರೇ ಆಗಲಿ ಅವರನ್ನು ಭೇಟಿ ಮಾಡಿಲ್ಲ ಎಂದು ಸಚಿವರು ಹೇಳಿದರು.
ಸುಹಾಸ್ ಶೆಟ್ಟಿ ಕುಟುಂಬಕ್ಕೆ ನ್ಯಾಯ ಸಿಗುವಂತೆ ಸರ್ಕಾರ ನೋಡಿಕೊಳ್ಳುತ್ತದೆ. ಈಗಾಗಲೇ ನಾವು ನಮ್ಮ ಕೆಲಸವನ್ನು ಮಾಡಿದ್ದೇವೆ ಮತ್ತು ನಾವು ಎಂಟು ಜನರನ್ನು ಬಂಧಿಸಿದ್ದೇವೆ. ಕರಾವಳಿ ಕರ್ನಾಟಕ ಭಾಗದಲ್ಲಿ ಶಾಶ್ವತವಾಗಿ ಕೋಮು ವಿರೋಧಿ ಕಾರ್ಯಪಡೆ ರಚಿಸಲಾಗುವುದು ಎಂದು ಸಚಿವ ಪರಮೇಶ್ವರ್ ಹೇಳಿದರು.