ಬೆಂಗಳೂರು: ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆದ ಆರೋಪ ಸಂಬಂಧ ವ್ಯಕ್ತಿಯ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಮಾಡಿದೆ.
ಮನೆಯ ಹಿಂಭಾಗದಲ್ಲಿ ಐದಾರು
ಗಾಂಜಾ ಗಿಡಗಳನ್ನು ಬೆಳೆದ ಆರೋಪದ ಮೇಲೆ 67 ವರ್ಷದ ವ್ಯಕ್ತಿಯೊಬ್ಬರ ವಿರುದ್ಧ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ(ಎನ್ಡಿಪಿಎಸ್) ಅಡಿ ಬನಶಂಕರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣ ರದ್ದು ಕೋರಿ ಜಯನಗರದ 7ನೇ ಬ್ಲಾಕ್ ನಿವಾಸಿ ಚಂದ್ರಶೇಖರ್ (67) ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ಅರ್ಜಿದಾರರು ಗಾಂಜಾ ಬೆಳೆಯುತ್ತಿದ್ದರು ಎಂಬುದನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ (ತನಿಖಾಧಿಕಾರಿಗಳು) ಯಾವುದೇ ಸಾಕ್ಷ್ಯ ಒದಗಿಸಿಲ್ಲ. ಅರ್ಜಿದಾರರ ಮನೆಯ ಹಿತ್ತಲಿನಲ್ಲಿ ಪತ್ತೆಯಾದ ಗಾಂಜಾ ಪ್ರಮಾಣ ಪ್ರತ್ಯೇಕಿಸದೆ ಬೇರು ಸಹಿತ ಸಸ್ಯಗಳ ಜೊತೆಗೆ ತೂಕ ಹಾಕಲಾಗಿದೆ. ಪ್ಲಾಸ್ಟಿಕ್ ಚೀಲ ಸೇರಿದಂತೆ ಗಾಂಜಾ ಗಿಡದ ಬೇರು, ಕಾಂಡ, ಎಲೆ ಮೊಗ್ಗುಗಳನ್ನು ತೂಕ ಮಾಡಲಾಗಿದೆ. ಬೆಳೆ ಬೆಳೆಯುವುದಕ್ಕೆ ನೈಸರ್ಗಿಕವಾಗಿ ಹುಟ್ಟಿ ಬೆಳೆದ ಸಸಿಗಳನ್ನು ಸಮಾನವಾಗಿ ನೋಡಲಾಗದು. ಆದ್ದರಿಂದ ದೋಷಾರೋಪ ಪಟ್ಟಿಯೇ ಕಾನೂನಿಗೆ ವಿರುದ್ಧವಾಗಿದೆ ಎಂದು ತಿಳಿಸಿದ ಪೀಠ, ಚಂದ್ರಶೇಖರ್ ವಿರುದ್ಧದ ಪ್ರಕರಣ ರದ್ದುಪಡಿಸಿದೆ.
ಏನಿದು ಪ್ರಕರಣ: 2023ರ ಸೆಪ್ಟೆಂಬರ್ 1ರಂದು
ಸಂಜೆ 4.30ರ ಸಮಯದಲ್ಲಿ ಪೊಲೀಸರು ಅರ್ಜಿದಾರರ ಮನೆಯನ್ನು ಶೋಧ ಮಾಡಿದ್ದರು. ಆ ವೇಳೆ ಮನೆಯ ಹಿತ್ತನಲಿನಲ್ಲಿ 5 ರಿಂದ 6 ಗಾಂಜಾ ಗಿಡಗಳನ್ನು ಬೆಳೆದಿರುವುದು ಕಂಡು ಬಂದಿತ್ತು. ಇದರಿಂದ ಎಫ್ಐಆರ್ ದಾಖಲಿಸಿದ್ದ ಪೊಲೀಸರು ತನಿಖೆ ನಡೆಸಿ, ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಸೂಕ್ತ ಸಾಕ್ಷ್ಯಾಧಾರ ಒದಗಿಸಿದ ಕಾರಣ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.