ಮಂಡ್ಯ: ಟ್ರಾಫಿಕ್ ಪೊಲೀಸರ ಬೇಜವಾಬ್ದಾರಿತನಕ್ಕೆ ಮೂರುವರೆ ವರ್ಷದ ಮಗು ಪ್ರಾಣಬಿಟ್ಟ ದಾರುಣ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ವಾಣಿ-ಅಶೋಕ್ ದಂಪತಿಯ ಪುತ್ರಿ ಹೃತೀಕ್ಷಾ ಎಂದು ಗುತಿಸಲಾಗಿದೆ. ಬಾಲಕಿಗೆ ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ದಂಪತಿ ಕರೆದುಕೊಂಡು ಬರುತ್ತಿದ್ದರು. ಈ ವೇಳೆ, ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ಹೆಲ್ಕೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಬೈಕ್ ಆಯಾ ತಪ್ಪಿ ಬಿದ್ದು, ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.
ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ರಸ್ತೆಯಲ್ಲೇ ಮಗುವನ್ನು ಮಡಿನಲ್ಲಿಟ್ಟುಕೊಂಡು ತಂದೆ-ತಾಯಿ ಗೋಳಾಡಿದ್ದಾರೆ. ಅಲ್ಲದೇ ಸಾರ್ವಜನಿಕರು, ಮೃತ ಮಗುವಿನ ಪೋಷಕರಿಗೆ ಸಾಥ್ ನೀಡಿದ್ದು, ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಮಗು ಸಾವನ್ನಪ್ಪಲು ಸಂಚಾರ ಪೊಲೀಸರೇ ಕಾರಣ’ ಎಂದು ಆರೋಪಿಸಿ, ಪೋಷಕರು ಮತ್ತು ಸಾರ್ವಜನಿಕರು ಮಿಮ್ಸ್ ಆಸ್ಪತ್ರೆ ಎದುರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಗುವಿನ ಮೃತದೇಹದೊಂದಿಗೆ ಪ್ರತಿಭಟನೆ ನಡೆಸಿದರು. ಅದರಿಂದ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಮೃತದೇಹವನ್ನು ಒಪ್ಪಿಸಲಾಯಿತು.
ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.