ಬೆಂಗಳೂರು: ಸರ್ಕಾರದ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ತನಿಖೆಗೆ ಪೂರಕವಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಡಾ.ಬಿ.ಕೆ. ನಾಗರಾಜಪ್ಪ, ಹಿಂದಿನ ವ್ಯವಸ್ಥಾಪಕ ನಿರ್ದೇಶಕಿ ಆರ್. ಲೀಲಾವತಿ ಮತ್ತು ಇತರರಿಗೆ ಸೇರಿದ ₹40 ಕೋಟಿ ಮೌಲ್ಯದ ಸ್ಥಿರ ಹಾಗೂ ಚರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಭೋವಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 750ಕ್ಕೂ ಹೆಚ್ಚು ನಕಲಿ ಫಲಾನುಭವಿಗಳ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿ ಸಾಲ ಮಂಜೂರು ಮಾಡಿ, ಅದನ್ನು ತಮ್ಮ ಹಿಡಿತದಲ್ಲಿರುವ ಕಂಪನಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು, ಅಕ್ರಮ ಎಸಗಿರುವ ಆರೋಪ ನಾಗರಾಜಪ್ಪ, ಲೀಲಾವತಿ ಮತ್ತು ಇತರರ ಮೇಲಿದೆ.
ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ 26.27 ಕೋಟಿ ರೂ. ಮೌಲ್ಯದ ಆದರೆ ಪ್ರಸ್ತುತ ಮಾರುಕಟ್ಟೆ ಮೌಲ್ಯ 40 ಕೋಟಿ ರೂ. ಹೊಂದಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ತಾತ್ಕಾಲಿಕ ಆದೇಶ ಹೊರಡಿಸಲಾಗಿದೆ.