ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ, ಮಾಜಿ ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರಿದ್ದಾರೆ.
ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳ ವಶಕ್ಕೆ ನೀಡಲಾಯಿತು. ಬಳಿಕ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಿದರು.
ಈಗಾಗಲೇ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದು ಮಾಡಿ ಆದೇಶಿಸಿತ್ತು.
ಏಳು ದಿನದೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿತ್ತು. ಅದರಂತೆ ವಿನಯ್ ಕುಲಕರ್ಣಿ ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ಮಾಡಿದ ನ್ಯಾಯಾಲಯವು ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳಿಗೆ ಒಪ್ಪಿಸಿತು.
ಸಿಬಿಐ ಪರ ವಿಶೇಷ ಸರ್ಕಾರಿ ಅಭಿಯೋಜಕ ಗಂಗಾಧರ ಶೆಟ್ಟಿ ಅವರು ಮಾತನಾಡಿ ಇದೇ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಚಂದ್ರಶೇಖರ್ ಎಂಬ ಆರೋಪಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಇದು ಸಮಾಜಕ್ಕೆ ಒಳ್ಳೆಯ ಸಂದೇಶ, ಯಾರೇ ತಪ್ಪು ಮಾಡಿದರೂ ಅವರ ವಿರುದ್ದ ಕ್ರಮ ಆಗುತ್ತದೆ. ಸಾಕ್ಷಿಗಳಿಗೆ ಪ್ರತ್ಯೇಕ ಅಥವಾ ಪರೋಕ್ಷ ಬೆದರಿಕೆ ಹಾಕುವ ಕೆಲಸ ಮಾಡುತ್ತಿದ್ದಾರೆ. ಪ್ರಕರಣದ 9ನೇ ಆರೋಪಿ ಅಶ್ವಥ್ ಎಂಬಾತ ಮಹಿಳಾ ಸಾಕ್ಷಿಯೊಬ್ಬರಿಗೆ ಬೆದರಿಕೆ ಹಾಕಿದ್ದ. ಹೀಗಾಗಿ ಸಾಕ್ಷಿದಾರರಿಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದೆವು. ಕೇಂದ್ರ ಸಂಸ್ಥೆಯಿಂದ ಆ ಮಹಿಳೆಗೆ ರಕ್ಷಣೆ ನೀಡಲು ನ್ಯಾಯಾಲಯ ಆದೇಶಿಸಿದೆ ಎಂದು ಹೇಳಿದರು.