ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್ ರಕ್ಷಣಾ ಮತ್ತು ವಿರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ಭೂಮಿ ಸ್ವಾಧೀನಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ರೈತರು, ಹೋರಾಟಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರಂದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆಂದು ಸಚಿವ ಎಂಬಿ.ಪಾಟೀಲ್ ಹೇಳಿದ್ದಾರೆ.
ಶನಿವಾರ ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವನಹಳ್ಳಿಯಲ್ಲಿ ಎರಡು ಗುಂಪಿನ ಜನರಿದ್ದಾರೆ. ಕೆಲವರು ಭೂಸ್ವಾಧೀನ ಬೇಡವೆಂದು ಹೋರಾಟ ಮಾಡುತ್ತಿದ್ದಾರೆ. ಮತ್ತೆ ಕೆಲವರು 449 ಎಕರೆ ಜಮೀನನ್ನು ಬಿಟ್ಟುಕೊಡಲು ಸಿದ್ಧವಾಗಿದ್ದು, ಎಕರೆಗೆ 3.5 ಕೋಟಿ ರೂ. ಪರಿಹಾರ ಕೇಳುತ್ತಿದ್ದಾರೆ. ರೈತರಲ್ಲೇ ಈ ಬಗ್ಗೆ ಬೇರೆಬೇರೆ ಅಭಿಪ್ರಾಯಗಳಿವೆ. ಸರ್ಕಾರ ಎಲ್ಲಾ ರೀತಿಯ ಸಾಧಕ-ಬಾಧಕಗಳನ್ನೂ ಪರಿಶೀಲಿಸುತ್ತಿದೆ ಎಂದು ಹೇಳಿದರು.
ರೈತರ ಪರವಾಗಿ ಕೆಲವು ಮುಖಂಡರು ಸಿಎಂ ಭೇಟಿ ಮಾಡಿ 449 ಎಕರೆಯನ್ನು ಸರ್ಕಾರಕ್ಕೆ ಬಿಟ್ಟುಕೊಡುವುದಾಗಿ ಹೇಳಿದ್ದಾರೆ. ಸರ್ಕಾರ ರೈತರ ನ್ಯಾಯಯುತ ಬೇಡಿಕೆಗೆ ಬೆಲೆಕೊಡುತ್ತದೆಯೇ ಹೊರತು, ಹೋರಾಟದ ಹಿಂದೆ ನಿಂತು ಕುಮ್ಮಕ್ಕು ಕೊಡುತ್ತಿರುವವರಿಗಲ್ಲ. ದೇವನಹಳ್ಳಿ ಸುತ್ತಮುತ್ತಲಿನ ಪರಿಸರದಲ್ಲಿ ಕೃಷಿ ಉಳಿಯಬೇಕು ಎನ್ನುವ ಹೋರಾಟಕ್ಕೆ ಸರ್ಕಾರದ ಬೆಂಬಲವಿದೆ. ಸರಕಾರವು ಶಾಶ್ವತ ಕೃಷಿವಲಯ ಮಾಡುವ ಬಗ್ಗೆಯು ಚಿಂತನೆ ನಡೆಸಿದೆ ಎಂದರು.