ಬೆಂಗಳೂರು: ದೂರುದಾರರೊಬ್ಬರಿಂದ ₹1ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ರಾಮಮೂರ್ತಿನಗರ ಠಾಣೆಯ ಇನ್ಪೆಕ್ಟರ್ ರಾಜಶೇಖರ್, ಪಿಎಸ್ಐ ರುಮಾನ್ ಪಾಷಾ ಹಾಗೂ ಖಾಸಗಿ ವ್ಯಕ್ತಿ ಇಮ್ರಾನ್ ಬಾಬು ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಮಗೆ ತಿಳಿಸದೇ ತಮ್ಮ ಪತ್ನಿ ಆಭರಣ ಮತ್ತು ಹಣ ತೆಗೆದುಕೊಂಡಿರುವುದಾಗಿ ಆರೋಪಿಸಿದ್ದು ಅವುಗಳನ್ನು ವಾಪಸ್ ಕೊಡಿಸಿಕೊಡುವಂತೆ ಗೋಪಿನಾಥ್ ಎಂಬವರು ರಾಮಮೂರ್ತಿನಗರ ಠಾಣೆಗೆ ದೂರು ನೀಡಿದ್ದರು. ಆದರೆ ಪ್ರಕರಣದ ತನಿಖೆ ನಡೆಸಲು ಪೊಲೀಸರು 2 ಲಕ್ಷ ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಗೋಪಿನಾಥ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಅದರಂತೆ ಲೋಕಾಯುಕ್ತದ ಬೆಂಗಳೂರು ನಗರ ವಿಭಾಗದ ಎಸ್.ಪಿ ಎಸ್.ಪಿ ಡಾ. ಕೆ.ವಂಶಿಕೃಷ್ಣ ಅವರ ಮಾರ್ಗದರ್ಶನಲ್ಲಿ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡು, 1 ಲಕ್ಷ ರು. ಸ್ವೀಕರಿಸುತ್ತಿದ್ದಾಗಲೇ ಮೂವರನ್ನೂ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ತನಿಖೆ ಮುಂದುವರೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.