ಬೆಂಗಳೂರು: ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಏಕಲವ್ಯ ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸು ತ್ತಿರುವ ಶಿಕ್ಷಕರಿಗೆ ನೇಮಕಾತಿ ಸಮಯದಲ್ಲಿ ಶೇ.5ರಷ್ಟು ಕೃಪಾಂಕ ನೀಡಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ಕಳೆದ 14 ವರ್ಷಗಳಿಂದ ಶಿಕ್ಷಕರು ನಡೆಸುತ್ತಿದ್ದ ಹೋರಾಟಕ್ಕೆ ನ್ಯಾಯ ಸಿಕ್ಕಿದಂತಾಗಿದೆ.
ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಶೇ.5ರಷ್ಟು ಕೃಪಾಂಕ ನೀಡಲೇಬೇಕೆಂದು ಹೈಕೋರ್ಟ್ ಆದೇಶ ವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. 2011ರಲ್ಲಿ ವೃಂದ ಮತ್ತು ನೇಮಕ ನಿಯಮ ಜಾರಿಗೆ ಬಂದಾಗ ಕಾರ್ಯ ನಿರ್ವಹಿಸುತ್ತಿದ್ದ ಗುತ್ತಿಗೆ ಶಿಕ್ಷಕರಿಗೆ ಇದು ಅನ್ವಯವಾಗಲಿದೆ.
2023ರಲ್ಲಿ ಹೈಕೋರ್ಟ್ ವಿಭಾಗೀಯಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ, ಸೊಸೈಟಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ನ್ಯಾ. ಜೆ.ಕೆ.ಮಹೇಶ್ವರಿ ಮತ್ತು ನ್ಯಾ. ವಿಜಯ್ ಬಿಷ್ಟೋಯ್ ಅವರಿದ್ದ ಪೀಠ ಈ ಮಹತ್ವದ ತೀರ್ಪು ನೀಡಿ ಆದೇಶಿಸಿದೆ.