ಬೆಂಗಳೂರು: ರೈತರ ಪರವಾಗಿ ನ್ಯಾಯ ಕೇಳಲು ಠಾಣೆಗೆ ಹೋದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್ಎಸ್) ಮಹಿಳಾ ಕಾರ್ಯಕರ್ತರ ಮೇಲೆ
ದೌರ್ಜನ್ಯವೆಸಗಿರುವ ಮಾದಕನಾಯಕನ ಹಳ್ಳಿ ಹಾಗೂ ನೆಲಮಂಗಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ಗಳ ವಿರುದ್ಧ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದೆ.
ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿರುವ ಮಹಿಳಾ ಆಯೋಗ ಪೊಲೀಸ್ ಠಾಣೆಯಲ್ಲಿ ವಿಡಿಯೊ ಚಿತ್ರೀಕರಣ ಮಾಡುತ್ತಿದ್ದ ಮಹಿಳೆಯೊಬ್ಬರ ಮೊಬೈಲ್ ಕಸಿದುಕೊಂಡು, ಸಾರ್ವಜನಿಕವಾಗಿ ನಡು ರಸ್ತೆಯಲ್ಲಿ ಎಳೆದುಕೊಂಡು ಹೋಗಿ ದೌರ್ಜನ್ಯವೆಸಗಿದ್ದಾರೆ. ಇದನ್ನು ಮಹಿಳಾ ಆಯೋಗ ಖಂಡಿಸುತ್ತದೆ ಮತ್ತು ದೌರ್ಜನ್ಯವೆಸಗಿದ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಆಗ್ರಹಿಸಿದೆ.
ಅನ್ಯಾಯಕ್ಕೆ ಒಳಗಾದ ರೈತರ ಪರವಾಗಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಕಾರ್ಯಕರ್ತರು ನ್ಯಾಯ ಕೇಳಲು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ತೆರಳಿದ್ದರು. ಸುಳ್ಳು ಪ್ರಕರಣದಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿದ್ದ ಕೆಆರ್ಎಸ್ ಪಕ್ಷದ ಕಾರ್ಯಕರ್ತರಿಗೆ ನೆಲಮಂಗಲ ಠಾಣೆಯ ಇನ್ಸ್ಪೆಕ್ಟರ್ ನರೇಂದ್ರ ಬಾಬು ಮೊಬೈಲ್ ಕಸಿದುಕೊಂಡು ಬೆದರಿಕೆ ಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದವರ ವಿರುದ್ಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಂಡು ವರದಿಯನ್ನು ಸಲ್ಲಿಸಬೇಕು ಎಂದು ಮಹಿಳಾ ಆಯೋಗ ನಿರ್ದೇಶಿಸಿದೆ.