ಬೆಂಗಳೂರು: ಪೂರ್ವ ಅನುಮತಿಯಿಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗದಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸುವಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘ-ಸಂಸ್ಥೆಗಳ ಕಾರ್ಯಚಟುವಟಿಕೆಗಳನ್ನು ನಿರ್ಬಂಧಿಸುವ ಮೂಲಕ ಪರೋಕ್ಷವಾಗಿ ಆರ್.ಎಸ್.ಎಸ್ ಗೆ ಅಂಕುಶ ಹೇರಲು ಸರಕಾರ ಸಂಪುಟದಲ್ಲಿ ತೀರ್ಮಾನಿಸಿದ ಬೆನ್ನಲ್ಲೇ ಬಸವನಗೌಡ ಪಾಟೀಲ್ ಯತ್ನಾಳ್ ಈ ಆಗ್ರಹ ಮುಂದಿಟ್ಟಿದ್ದಾರೆ.
ಪತ್ರದ ಪ್ರತಿಯನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು, ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಸರಕಾರದ ಆಶಯ ಎಲ್ಲರಿಗೂ ಅನ್ವಯವಾಗಬೇಕು ಅದರಂತೆ ಸರ್ಕಾರ ಕ್ರಮಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.
ರಸ್ತೆಗಳು, ಬಸ್ನಿಲ್ದಾಣ, ಪಾದಚಾರಿ ಮಾರ್ಗಗಳು, ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯದೆ ನಮಾಜ್ ಮಾಡುವುದನ್ನು ನೋಡುತ್ತಿದ್ದೇವೆ. ಅಂತಹ : ಚಟುವಟಿಕೆಗಳಿಂದ ವಾಹನ ಮತ್ತು ಪಾದಾಚಾರಿಗಳ ಚಲನವಲನಕ್ಕೆ ಅಡ್ಡಿಯಾಗುವುದಲ್ಲದೆ, ಸಾರ್ವಜನಿಕರಿಗೆ ತೀವ್ರ ಅನಾನುಕೂಲವಾಗುತ್ತದೆ. ಇದು ಮುಕ್ತ ಸಂಚಾರಕ್ಕೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕಿನ ಉಲ್ಲಂಘನೆ. ಇದನ್ನು ತಪ್ಪಿಸಲು ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಗೂ ನಿರ್ಬಂಧ ಹೇರಬೇಕು ಎಂದು ಪತ್ರದಲ್ಲಿ ಉಲ್ಲೇಖಿಸುವ ಮೂಲಕ ಯತ್ನಾಳ್ ಸರ್ಕಾರವನ್ನು ಆಗ್ರಹಿಸಿದ್ದಾರೆ.