ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ
ಆರೋಪದಡಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನಿಲ್ ಮತ್ತು ಸಹಾಯಕ ಸಬ್ ಇನ್ಸ್ಪೆಕ್ಟರ್ ಪ್ರಕಾಶ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಸೋಮವಾರ ಆದೇಶಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಲಿಖಿತ ದೂರು ನೀಡಿದ್ದರು. ಈ ಸಂಬಂಧ ಗೋವಿಂದಪುರ ಠಾಣೆಯಲ್ಲಿ ಇಬ್ಬರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬೆನ್ನಲ್ಲೇ ಇಬ್ಬರು ಅಧಿಕಾರಿಗಳನ್ನು ಅಮಾನತು ಗೊಳಿಸಲಾಗಿದೆ.
ಮದುವೆ ಆಗುವುದಾಗಿ ಇನ್ಸ್ಪೆಕ್ಟರ್ ಸುನಿಲ್ ಅವರು ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಫೋಟೊ ಹಾಗೂ ವಿಡಿಯೊ ಇಟ್ಟುಕೊಂಡಿದ್ದಾರೆ. ವಿಷಯ ಬಹಿರಂಗ ಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದರು.
ಫೋನ್ ಮಾಡಿದಾಗಲೆಲ್ಲ ವಿಡಿಯೊ ಕಾಲ್ ಮಾಡಿ ನಗ್ನಗೊಳ್ಳುವಂತೆ ಒತ್ತಾಯಿಸಿದ್ದರು. ಈ ವಿಚಾರ ತಿಳಿದ ಅದೇ ಠಾಣೆಯ ಎಎಸ್ಐ ಪ್ರಕಾಶ್ ಅವರು ‘ಸುನಿಲ್ ಜತೆಗೆ ಸಹಕಾರ ನೀಡಿದ್ದೀಯಾ. ನನಗೆ ಏಕೆ ಸಹಕಾರ ನೀಡುವುದಿಲ್ಲ’ ಎಂದು ಬೆದರಿಸಿ ಲೈಂಗಿಕ ಕಿರುಕುಳ ನೀಡಿದ್ದರು’ ಎಂದು ಸಂತ್ರಸ್ತೆ ಆರೋಪಿಸಿ ಗೋವಿಂದಪುರ ಠಾಣೆಯಲ್ಲಿ ದೂರು ನೀಡಿದ್ದರು.