ಬೆಂಗಳೂರು: ವ್ಯಕ್ತಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎಂಬ ಕಾರಣಕ್ಕೆ ಪಾಸ್ಪೋರ್ಟ್ ನಿರಾಕರಿಸಲಾಗದು. ಮೂಲಭೂತ ಹಕ್ಕುಗಳಲ್ಲಿ ಪ್ರಯಾಣಿಸುವ ಹಕ್ಕು ಪ್ರಜೆಗಳ ಜೀವಿಸುವ ಹಕ್ಕಿನ ಅವಿಭಾಜ್ಯ ಭಾಗ ಎಂದು ಕರ್ನಾಟಕ ಹೈಕೋಟ್೯ ತೀರ್ಪಿನಲ್ಲಿ ಹೇಳಿದೆ.
ಮಂಡ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎಂಬ ಕಾರಣಕ್ಕೆ ಪಾಸ್ಪೋರ್ಟ್ ನಿರಾಕರಿಸಲಾಗುತ್ತಿದೆ. ಪಾಸ್ಪೋರ್ಟ್ ನೀಡುವಂತೆ ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೆಂಗೇರಿಯ ಅನೂಪ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, 15 ದಿನಗಳೊಳಗೆ ಅಲ್ಪಾವಧಿ ಮಾನ್ಯತೆಯ ಪಾಸ್ಪೋರ್ಟ್ ನೀಡುವಂತೆ ಬೆಂಗಳೂರು ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿಗೆ ನಿರ್ದೇಶನ ನೀಡಿದೆ.
ಆದರೆ, ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿದಾರ ಪ್ರಯಾಣದ ಮಾಹಿತಿ ಮತ್ತು ದಾಖಲೆಗಳನ್ನು ನೀಡಿ ಅನುಮತಿ ಪಡೆದುಕೊಳ್ಳಬೇಕು. ನ್ಯಾಯಾಲಯ ವಿಧಿಸುವ ಷರತ್ತಿಗೆ ಬದ್ಧರಾಗಿರಬೇಕು ಎಂದು ಹೈಕೋರ್ಟ್ ತೀರ್ಪಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ.