ಮೈಸೂರು: ದೆಹಲಿ ರಾಜಕಾರಣ ಮುಗಿದ ಮೇಲೆ ನಾನು ರಾಜ್ಯ ರಾಜಕಾರಣದತ್ತ ಆಸಕ್ತಿ ಹೊಂದಿದ್ದು, ಮೈಸೂರು ಚಾಮರಾಜ ಕ್ಷೇತ್ರವನ್ನು ನನ್ನ ರಾಜಕೀಯ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ದೃಷ್ಟಿಯಿಂದಲೂ ಚಾಮರಾಜ ಕ್ಷೇತ್ರ ನನಗೆ ಅನುಕೂಲಕರವಾಗಿದೆ. ಹೀಗಾಗಿ ನಾನು ಆಯ್ಕೆ ಮಾಡಿಕೊಂಡಿದ್ದೇನೆ. ಈ ಹಿಂದೆ ಶಂಕರಲಿಂಗೇಗೌಡರು ನಾಲ್ಕು ಬಾರಿ ಚಾಮರಾಜ ಕ್ಷೇತ್ರದಿಂದ ಬಿಜೆಪಿಯಿಂದ ಗೆದ್ದಿದ್ದಾರೆ. ಇದು ಬಿಜೆಪಿ ಕ್ಷೇತ್ರ. ಹೀಗಾಗಿ ಇಲ್ಲಿಂದಲೇ ಚಟುವಟಿಕೆ ಆರಂಭಿಸಿದ್ದೇನೆ ಎಂದರು. ಚಾಮರಾಜ ಕ್ಷೇತ್ರ ಹಣದ ಪ್ಯಾಕೇಟ್ ಕೊಟ್ಟು ಗೆಲ್ಲುವ ಕ್ಷೇತ್ರ ಅಲ್ಲ. ಇಲ್ಲಿಯ ಮತದಾರರು ಕೆಲಸ ನೋಡಿ ಪ್ರೀತಿ ತೋರಿಸುವ ಜನ. ಬರಿ ಒಕ್ಕಲಿಗ ಲೆಕ್ಕದಲ್ಲೇ ಈ ಕ್ಷೇತ್ರ ನೋಡುತ್ತಿಲ್ಲ. ಇಲ್ಲಿ ಎಲ್ಲ ರೀತಿಯ ವರ್ಗದ ಜನರು ಇದ್ದಾರೆ. ಪ್ರಜ್ಞಾವಂತರು ಮತ್ತು ಬುದ್ದಿವಂತರಿದ್ದಾರೆ. ಹೀಗಾಗಿ ಸಹಜವಾಗಿ ಚಾಮರಾಜ ಕ್ಷೇತ್ರ ನನ್ನ ಆಯ್ಕೆಯಾಗಿದೆ ಎಂದು ಹೇಳಿದರು.