
ಗಂಗಾವತಿ: ಮಹಿಳೆಯೊಬ್ಬರಿಗೆ ಸಹಾಯ ಮಾಡುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ, ₹6 ಲಕ್ಷ ದಂಡ ವಿಧಿಸಿ ಶುಕ್ರವಾರ ಆದೇಶಿಸಿದೆ. ಮೊಹಮ್ಮದ್ ಅಜರುದ್ದೀನ್ ಜೀವಾವಧಿ ಶಿಕ್ಷೆಗೊಳಗಾದ ಸರ್ಕಾರಿ ಶಾಲಾ ಶಿಕ್ಷಕ.
2022ರ ಜೂನ್ ತಿಂಗಳಲ್ಲಿ ಈ ಘಟನೆ ನಡೆದಿದ್ದು, ಆಗ ಆರೋಪಿ ಅಜುರುದ್ದೀನ್ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಜಿಲ್ಲೆಯ ಕಾರಟಗಿಯಲ್ಲಿ ವಾಸವಾಗಿದ್ದ ಮಹಿಳೆಗೆ ಸರ್ಕಾರಿ ಸವಲತ್ತುಗಳನ್ನು ಕೊಡಿಸುತ್ತೇನೆ ಎಂದು ನಂಬಿಸಿ ಅತ್ಯಾಚಾರ ಎಸಗಿದ್ದಲ್ಲದೇ ಅದನ್ನು ತನ್ನ ಮೊಬೈಲ್ನಲ್ಲಿ ವಿಡಿಯೊ ಚಿತ್ರೀಕರಣ ಮಾಡಿಕೊಂಡು ಅದನ್ನು ನೊಂದ ಮಹಿಳೆಗೆ ತೋರಿಸಿ ಲೈಂಗಿಕ ಕ್ರಿಯೆಗೆ ಸಹಕರಿಸದಿದ್ದರೆ ವಿಡಿಯೊ ವೈರಲ್ ಮಾಡುವುದಾಗಿ ಬ್ಲಾಕ್ಮೇಲ್ ಮಾಡುತ್ತಿದ್ದ. ಈ ಕುರಿತು ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅಜುರುದ್ದೀನ್ ಮೇಲಿನ ಆರೋಪ ಸಾಬೀತಾಗಿದ್ದು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಅಪರಾಧಿಗೆ ₹6 ಲಕ್ಷ ದಂಡ ವಿಧಿಸಲಾಗಿದ್ದು, ಇದರಲ್ಲಿ ನೊಂದ ಮಹಿಳೆಗೆ ₹5.50 ಲಕ್ಷ ಹಾಗೂ ₹50 ಸಾವಿರ ರಾಜ್ಯ ಸರ್ಕಾರಕ್ಕೆ ತುಂಬಬೇಕು’ ಎಂದು ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ ಅವರು ಆದೇಶಿಸಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್ ನಾಗಲಕ್ಷ್ಮೀ ಎಸ್. ಸಂತ್ರಸ್ತೆಯಪರ ವಾದ ಮಂಡಿಸಿದ್ದರು.