ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತೆಯರಿಗೆ ಕೊಡುತ್ತಿದ್ದ ಮಾಸಿಕ ಪಿಂಚಣಿಯನ್ನು 10 ಸಾವಿರದಿಂದ 50 ಸಾವಿರ ರು.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ ನಲ್ಲಿ ಭರವಸೆ ನೀಡಿದರು.
ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತೆಯರಿಗೆ ಸಿಗಬೇಕಾದ ನೆರವು ಮತ್ತು ಪರಿಹಾರ ಕಳೆದ 10 ವರ್ಷಕ್ಕೂ ಹೆಚ್ಚು ಅವಧಿಯಿಂದ ಸಿಗದಿರುವ ಬಗ್ಗೆ ಕಾಂಗ್ರೆಸ್ ಸದಸ್ಯ ಕೆ.ಶಿವಕುಮಾರ್ ಸದನದ ಗಮನ ಸೆಳೆದರು.
ಇದಕ್ಕೆ ಉತ್ತರಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಸಂತ್ರಸ್ತೆಯರಿಗೆ 2022 ಏ.1ರಿಂದ ಮಾಸಿಕ 10 ಸಾವಿರ ರು.ಪಿಂಚಣಿಯನ್ನು ಫಲಾನುಭವಿಗಳಿಗೆ ಕೊಡಲಾ ಗುತ್ತಿದ್ದು, 2025ರ ಡಿಸೆಂಬರ್ನಲ್ಲಿ ಒಟ್ಟು 59 ಫಲಾನುಭವಿಗಳಿಗೆ ಪಿಂಚಣಿ ಪಾವತಿ ಮಾಡಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಇರುವ 169 ಮಂದಿ ಆ್ಯಸಿಡ್ ಸಂತ್ರಸ್ತೆಯರಿಗೆ ಮಾಸಿಕ 50 ಸಾವಿರ ರು.ಪಿಂಚಣಿ ಕೊಡುವಂತೆ ಮುಖ್ಯಮಂತ್ರಿಯವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರೊಂದಿಗೆ ಸಮಾಲೋಚಿಸಿ ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿದರು. ಜೊತೆಗೆ ವಸತಿ ಯೋಜನೆಯಡಿ 169 ಮಂದಿಗೂ ಉಚಿತವಾಗಿ ಮನೆಗಳನ್ನು ನೀಡಲು ವ್ಯವಸ್ಥೆ ಮಾಡುತ್ತೇವೆ ಎಂದು ಇದೇ ವೇಳೆ ಹೇಳಿದರು.