ಬೆಂಗಳೂರು: ಕಾನೂನು ಬದ್ಧ ಪ್ರಕ್ರಿಯೆ ಪಾಲಿಸದೆ ವಿನಾಕಾರಣ ನಾಗರಿಕರನ್ನು ಪೊಲೀಸ್ ಠಾಣೆಗೆ ಕರೆಸುವುದು ಮತ್ತು ಗಂಟೆಗಟ್ಟಲೆ ಕೂರಿಸುವುದು ಸ್ಪಷ್ಟವಾಗಿ ಅಧಿಕಾರದ ದುರುಪಯೋಗ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಶೇಷಾದ್ರಿಪುರದ ಎನ್. ಮಂಜುನಾಥ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ನ್ಯಾಯಪೀಠವು, ಪೊಲೀಸರು ಕಾನೂನು ಪ್ರಕ್ರಿಯೆಯನ್ನು ಪಾಲಿಸದೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಕಟ್ಟುನಿಟ್ಟಿನ ಆದೇಶ ನೀಡಿದೆ.
ಪ್ರಕರಣದ ಹಿನ್ನೆಲೆ: ಅರ್ಜಿದಾರ ಮಂಜುನಾಥ್ ವಿರುದ್ಧದ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದರೂ, ಶೇಷಾದ್ರಿಪುರಂ ಪೊಲೀಸರು ಪದೇ ಪದೇ ಅವರನ್ನು ಬಲವಂತವಾಗಿ ಠಾಣೆಗೆ ಕರೆದೊಯ್ಯುತ್ತಿದ್ದರು. ದಿನವಿಡೀ ಠಾಣೆಯಲ್ಲಿ ಕೂರಿಸುವ ಮೂಲಕ ತಮಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಮಂಜುನಾಥ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿವರಣೆ ನೀಡುವಂತೆ ಈ ಹಿಂದೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿತ್ತು.
ವಿಚಾರಣೆ ವೇಳೆ ಪೊಲೀಸರು “ಅರ್ಜಿದಾರರ ಜೀವಕ್ಕೆ ಬೆದರಿಕೆ ಇತ್ತು ಎಂಬ ಕಾರಣಕ್ಕೆ ಮುನ್ನೆಚ್ಚರಿಕೆಯಾಗಿ ಅವರನ್ನು ಠಾಣೆಗೆ ಕರೆಸಲಾಗಿತ್ತು” ಎಂದು ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಈ ವಾದವನ್ನು ನಿರಾಕರಿಸಿರುವ ನ್ಯಾಯಪೀಠ, ಒಬ್ಬ ವ್ಯಕ್ತಿಯ ಜೀವಕ್ಕೆ ಬೆದರಿಕೆ ಇದ್ದರೆ ಅವರಿಗೆ ಸೂಕ್ತ ಭದ್ರತೆ ನೀಡಬೇಕೇ ಹೊರತು, ಠಾಣೆಯಲ್ಲಿ ಕೂರಿಸುವುದು ಸರಿಯಲ್ಲ ಎಂದಿದೆ.