ದಕ್ಷಿಣ ಕನ್ನಡ: ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದ ಅವಳಿ ಮಕ್ಕಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯದ ಕಡೀರದಲ್ಲಿ ನಡೆದಿದೆ.
ಮೃತ ಮಕ್ಕಳನ್ನು ಕಡೀರ ನಿವಾಸಿ ವಸಂತ ಅವರ ಐದೂವರೆ ವರ್ಷದ ಅವಳಿ ಮಕ್ಕಳಾದ ಜಶ್ವಿನ್ ಮತ್ತು ಜಸ್ವಿ ಎಂದು ಗುರುತಿಸಲಾಗಿದೆ. ಇಬ್ಬರೂ ಮುರುಳ್ಯ ಶಾಂತಿನಗರ ಶಾಲೆಯ ಯುಕೆಜಿ ವಿದ್ಯಾರ್ಥಿಗಳಾಗಿದ್ದರು.
ನಿನ್ನೆ ಸಾಯಂಕಾಲ ತಂದೆ-ತಾಯಿ ಆ ಇಬ್ಬರು ಅವಳಿ ಮಕ್ಕಳನ್ನು ಮನೆಯಲ್ಲಿ ಬಿಟ್ಟು ತೋಟದ ಕೆಲಸಕ್ಕೆ ತೆರಳಿದ್ದರು. ಬಳಿಕ ಕೆಲಸ ಮುಗಿಸಿ ತಾಯಿ ಮನೆಗೆ ವಾಪಸ್ಸಾದಾಗ ಮಕ್ಕಳು ಮನೆಯಲ್ಲಿ ಕಾಣಿಸದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ಆರಂಭಿಸಿದರು. ಈ ವೇಳೆ ಮನೆ ಸಮೀಪದ ಕೆರೆಯಲ್ಲಿ ಇಬ್ಬರು ಮಕ್ಕಳ ಮೃ*ತದೇಹಗಳು ಪತ್ತೆಯಾಗಿವೆ. ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮಕ್ಕಳು ಸಾವನ್ನಪ್ಪಿವೆ.
ಮಾಹಿತಿ ತಿಳಿಯುತ್ತಿದ್ದಂತೆ ಸುಳ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕೆರೆಯಿಂದ ಮಕ್ಕಳ ಮೃ*ತದೇಹಗಳನ್ನು ಹೊರತೆಗೆದಿದ್ದಾರೆ. ಈ ಘಟನೆಯಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲುಮುಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.