ಬೆಂಗಳೂರು: ಬಿಡದಿ ಟೌನ್ಶಿಪ್ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಸುಮಾರು 516 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಈ ಕುರಿತು ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲ ಕೆ.ಬಿ.ರಾಜೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಅರ್ಜಿದಾರರು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರದ ಕಾಯ್ದೆ-1987ಎ ಸೆಕ್ಷನ್ 17ರ ಅಡಿಯಲ್ಲಿ ಭೂ ಸ್ವಾಧೀನಕ್ಕೆ ಸರ್ಕಾದ ಹೊರಡಿಸಿದ ಅಧಿಸೂಚನೆ ಪ್ರಶ್ನಿಸಿದ್ದಾರೆ. ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ವಸತಿಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆಯ ಹಕ್ಕು ಕಾಯ್ದೆ-2013ರ ನೀಡಬೇಕಾದ ಪ್ರಮಾಣದಲ್ಲಿ ರೈತರಿಗೆ ಪರಿಹಾರ ನಿಗದಿಪಡಿಸಿಲ್ಲ ಎಂಬ ಅಂಶ ಆಧರಿಸಿ ವಾದ ಮಂಡಿಸಿದ್ದಾರೆ. ಆದರೆ, ಭೂಸ್ವಾಧೀನ ಅಧಿಸೂಚನೆ ಯಾವ ಕಾಯ್ದೆ ಹಾಗೂ ಕಾನೂನು ಉಲ್ಲಂಘಿಸುತ್ತದೆ ಎಂದು ತಿಳಿಸಿಲ್ಲ ಎಂದು ಅಭಿಪ್ರಾಯಪಟ್ಟಿರುವ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.