ಹಾಸನ ಜಿಲ್ಲೆಯ ಹಳೇಬೀಡು ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ್, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರುದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೂರುದಾರರ ದೂರಿನ ಮೇರೆಗೆ ಪಕ್ಕಾ ಪ್ಲಾನ್ ಮಾಡಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಲಂಚದ ಹಣದ ಸಮೇತ ಅಧಿಕಾರಿಯನ್ನು ರೆಡ್-ಹ್ಯಾಂಡಾಗಿ ಬಂಧಿಸಿದ್ದಾರೆ.
ಹಳೇಬೀಡು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾನ್-ಕಾನ್ಸಿಡೆನ್ಶಿಯಲ್ ರಿಪೋರ್ಟ್ (NCR) ಒಂದನ್ನು ಇತ್ಯರ್ಥಪಡಿಸಲು ಪಿಎಸ್ಐ ಮಂಜುನಾಥ್ ದೂರುದಾರರಿಂದ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ಇಷ್ಟವಿಲ್ಲದ ದೂರುದಾರರು ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ:
ದೂರಿನ ಆಧಾರದ ಮೇಲೆ ಕಾರ್ಯಾಚರಣೆ ರೂಪಿಸಿದ ಲೋಕಾಯುಕ್ತ ತಂಡ, ಮುಂಗಡವಾಗಿ ₹20,000 ಲಂಚದ ಹಣವನ್ನು ಪಡೆದುಕೊಳ್ಳುತ್ತಿದ್ದ ವೇಳೆ ಪಿಎಸ್ಐ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದೆ. ಲೋಕಾಯುಕ್ತ ಎಸ್ಪಿ ನಂದಿನಿ ಅವರ ಮಾರ್ಗದರ್ಶನದಲ್ಲಿ, ಇನ್ಸ್ಪೆಕ್ಟರ್ಗಳಾದ ಶಿಲ್ಪಾ ಹಾಗೂ ಗವಿರಾಜು ಅವರ ನೇತೃತ್ವದ ತಂಡ ಹಳೇಬೀಡು ಪೊಲೀಸ್ ಠಾಣೆಯಲ್ಲೇ ಈ ದಾಳಿ ನಡೆಸಿದೆ.
ಲೋಕಾಯುಕ್ತ ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಿಎಸ್ಐ ಮಂಜುನಾಥ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.