ಬೆಂಗಳೂರು: ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸುವ ಅಧಿಕಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ (ಸಿಇಒ) ಇಲ್ಲ ಎಂದು ಉಚ್ಚ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.
ಸೇವೆಯಿಂದ ತಮ್ಮನ್ನು ವಜಾಗೊಳಿಸಿದ ಜಿ.ಪಂ. ಸಿಇಒ ಕ್ರಮವನ್ನು ಪ್ರಶ್ನಿಸಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮ ಪಂಚಾಯಿತಿಯ ಕ್ಲರ್ಕ್ ಕಮ್ ಡೇಟಾ ಎಂಟ್ರಿ ಆಪರೇಟರ್ ಪ್ರವೀಣ್ ಹಂಚಿನಾಳ ಅವರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಹಾಗೂ ನ್ಯಾಯಮೂರ್ತಿ ಎಂ. ಶೃಂಗೇಶ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಸ್ಪಷ್ಟನೆ ನೀಡಿದೆ.
ವಯೋಮಿತಿ ಸಡಿಲಿಕೆ, ಸೇವಾ ಅನುಭವದ ವೇಟೇಜ್ಗೆ ನಿರ್ದೇಶನ:
ಇಲಾಖೆಯಲ್ಲಿ 2021ರಿಂದ ನೇಮಕಾತಿ ಪ್ರಕ್ರಿಯೆಗಳು ಸ್ಥಗಿತಗೊಂಡಿರುವುದನ್ನು ಗಮನಿಸಿದ ಪೀಠವು, ಮುಂದೆ ಹೊಸ ನೇಮಕಾತಿ ಪ್ರಕ್ರಿಯೆಗಳು ನಡೆದರೆ ಅದರಲ್ಲಿ ಭಾಗವಹಿಸಲು ಅರ್ಜಿದಾರರಿಗೆ ಅವಕಾಶ ನೀಡಬೇಕು. ಅರ್ಜಿ ಸಲ್ಲಿಕೆ ವೇಳೆಯಲ್ಲಿ ಅವರಿಗೆ ಅಗತ್ಯ ವಯೋಮಿತಿ ಸಡಿಲಿಕೆ ಹಾಗೂ ಅವರ ಹಿಂದಿನ ಸೇವಾ ಅನುಭವವನ್ನು ಪರಿಗಣಿಸಿ ‘ವೇಟೇಜ್’ (ಆ್ಯಡೇಜ್) ನೀಡುವ ಮೂಲಕ ನೇಮಕಾತಿಯಲ್ಲಿ ಆದ್ಯತೆ ಒದಗಿಸಬೇಕು ಎಂದು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.